ashwaveega news 24×7 ಮಾರ್ಚ್26.2026ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ ಜಿಲ್ಲೆಯ ಹಲವು ಭಾಗಗಳಲ್ಲಿ ಬುಧವಾರ ಅರ್ಧ ಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆ ಸುರಿದಿದೆ. ಕೆಲವೆಡೆ ಗುಡುಗಿನ ಅಬ್ಬರದ ಜತೆಗೆ ಆಲಿಕಲ್ಲುಗಳೂ ಬಿದ್ದಿವೆ. ಖಾನಾಪುರ, ಬೆಳಗಾವಿ, ಹುಕ್ಕೇರಿ, ಸವದತ್ತಿ, ರಾಮದುರ್ಗ, ಯರಗಟ್ಟಿ, ಬೈಲಹೊಂಗಲ, ಮೂಡಲಗಿ ತಾಲೂಕಿನ ಹಲವು ಗ್ರಾಮಗಳಲ್ಲಿ ಸಾಧಾರಣ ಮಳೆ ಸುರಿಯಿತು.

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಅಂಡಾರು, ಕಾಡುಹೊಳೆ, ಮುನಿಯಾಲು, ಮುಟ್ಲುಪಾಡಿ ಮೊದಲಾದೆಡೆ ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿಮಳೆಗೆ ಹಾನಿ ಸಂಭವಿಸಿದೆ. ಅಜೆಕಾರು, ಅಂಡಾರು ಪರಿಸರದಲ್ಲಿ 30ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿವೆ.
ಆರೆಂಜ್ ಅಲರ್ಟ್:ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮಾ.26ರಿಂದ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಮಾ.26ರಂದು ಬಿರುಗಾಳಿ, ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ರೈತರು, ಕುರಿಗಾಹಿಗಳು ಎಚ್ಚರಿಕೆವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ.
ಬೆಂ.ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರದಲ್ಲಿ ಇಂದು (ಮಾ.26) ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
