
ಬೆಂಗಳೂರು : ಚನ್ನಪಟ್ಟಣದಲ್ಲಿ ಟಿಕೆಟ್ ಅನೌನ್ಸ್ಗೂ ಮೊದಲೇ ಬಿಜೆಪಿ ಮತ್ತು ಕಾಂಗ್ರೆಸ್ ಆಂತರಿಕ ಯುದ್ಧ ಆರಂಭವಾಗಿದ್ದು, ಮಾಜಿ ಸಚಿವ, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ಗೆ ಸೇರ್ಪಡೆ ಆಗಿದ್ದಾರೆ. ಆ ಮೂಲಕ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯೋದು ಪಕ್ಕಾ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಇಂದು ಅತಿ ದೊಡ್ಡ ಬೆಳವಣಿಗೆ ಆಗಿದೆ.
ಹೌದು ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆಯೆ ಎಲ್ಲಾ ಪಕ್ಷಗಳಿಗೂ ಕಗ್ಗಂಟಾಗಿದ್ದು, ಇದೀಗ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷವನ್ನು ಸೇರುವ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಈ ಕುರಿತು ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ ಯೋಗೀಶ್ವರ್ ಚರ್ಚಿಸಿದ್ದು, ಮಧ್ಯರಾತ್ರಿ ಖಾಸಗಿ ಹೊಟೇಲಿನಲ್ಲಿ ಡಿಕೆಶಿಯನ್ನು ರಹಸ್ಯವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಂದು ಬೆಳಗ್ಗೆ ಸಿಎಂ ನಿವಾಸದಲ್ಲಿ ಪಕ್ಷ ಸೇರ್ಪಡೆಗೆ ಸಿಪಿವೈಗೆ ಡಿಕೆಶಿ ತಿಳಿಸಿದ್ದು, ಅದರಂತೆ ಇಂದು ಬೆಳಗ್ಗೆಯೇ ಡಿಕೆಶಿ ನಿವಾಸಕ್ಕೆ ಯೋಗೀಶ್ವರ್ ತೆರಳಿದ್ದರು. ಸಿಪಿ ಯೋಗೇಶ್ವರ್ ಅವರನ್ನು ಜೆಡಿಎಸ್ನಿಂದಲೇ ಸ್ಪರ್ಧೆ ಮಾಡಿಸಲು ಬಿಜೆಪಿ ಮುಂದಾಗಿತ್ತು. ಬಿಜೆಪಿ ರಾಷ್ಟ್ರೀಯ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆಗೆ ಜೆಡಿಎಸ್ ಸಹ ಕಸರತ್ತು ನಡೆಸಿತ್ತು ಎನ್ನಲಾಗಿದೆ.