
ಮುಂಬರುವ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ರಾಷ್ಟ್ರಭಕ್ತ ಬಳಗದಿಂದ ಎಲ್ಲಾ 35 ವಾರ್ಡ್ ಗಳಿಗೂ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಲಾಗುವುದು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದಂತೆ, ಶಿವಮೊಗ್ಗ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಿಸಬೇಕು. ಈಗಾಗಲೇ ಸುಪ್ರೀಂ ಕೋರ್ಟ್ ಶಿವಮೊಗ್ಗ ಸೇರಿದಂತೆ ಮೂರು ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆಸಬೇಕೆಂದು ಆದೇಶ ನೀಡಿದೆ. ಆದರೆ, ರಾಜ್ಯ ಸರ್ಕಾರ ಈ ಬಗ್ಗೆ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ. ಚುನಾವಣಾ ಆಯೋಗವೂ ಕೂಡ ಇನ್ನು 8 ದಿನದಲ್ಲಿ ನೋಟಿಫಿಕೇಷನ್ ಹೊರಡಿಸುವುದಾಗಿ ತಿಳಿಸಿದೆ. ಆದರೆ, ಮೀಸಲಾತಿ ಮತ್ತು ವಾರ್ಡ್ ಗಳ ಹೆಚ್ಚಳ ಸೇರಿದಂತೆ ಇತರ ವಿಷಯಗಳಿಗಾಗಿ ಚುನಾವಣೆಯನ್ನು ಮುಂದೂಡಬಾರದು. ತಕ್ಷಣವೇ ಶಿವಮೊಗ್ಗ ಮಹಾನಗರ ಪಾಲಿಕೆಗೆ ಚುನಾವಣೆ ಘೋಷಬೇಕು ಎಂದು ಒತ್ತಾಯಿಸಿದ್ದಾರೆ.
ಮೀಸಲಾತಿ ಯಾವುದೇ ಇರಲಿ, ಅದು ಹಳೆಯದೇ ಆಗಿರಲಿ, ಹೊಸದೇ ಆಗಿರಲಿ. ಮೀಸಲಾತಿಗೆ ತಕ್ಕಂತೆ ರಾಷ್ಟ್ರ ಭಕ್ತರ ಬಳಗದಿಂದ ಎಲ್ಲಾ ವಾರ್ಡ್ ಗಳಲ್ಲಿಯೂ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ. ಹಿಂದುತ್ವಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ. ಮತ್ತು ಆ ವಾರ್ಡ್ ನಲ್ಲಿ ಉತ್ತಮ ಸೇವೆ ಮಾಡುವ ಅಭ್ಯರ್ಥಿಗಳನ್ನು ಹುಡುಕಿ ಟಿಕೆಟ್ ನೀಡಲಾಗುವುದು. ಮುಸ್ಲಿಮರಿಗೆ ಟಿಕೆಟ್ ನೀಡುವುದಿಲ್ಲ. ಆದರೆ ನಿಜವಾಗಿಯೂ ರಾಷ್ಟ್ರ ಭಕ್ತರೆಂದು ಕಂಡು ಬಂದರೆ ಹಿಂದು ಆಗಲಿ, ಮುಸ್ಲಿಂ, ಕ್ರೈಸ್ತರಾಗಲಿ ಅವರಿಗೆ ಟಿಕೆಟ್ ನೀಡಲಾಗುವುದು ಎಂದರು.
ಪಾಲಿಕೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಚಿಹ್ನೆಯ ಗೊಂದಲ ಉಂಟಾಗಬಹುದು. ಚುನಾವಣಾ ಆಯೋಗಕ್ಕೆ ಒಂದೇ ಚಿಹ್ನೆ ಕೊಡುವಂತೆ ಮನವಿ ಮಾಡುತ್ತೇವೆ. ಕೊಡಲು ಆಗದಿದ್ದರೆ ಆಯಾ ಅಭ್ಯರ್ಥಿಗಳು ತಮಗೆ ಸಿಕ್ಕ ಚಿಹ್ನೆ ಅಡಿಯಲ್ಲಿಯೇ ಚುನಾವಣೆ ಎದುರಿಸುತ್ತಾರೆ. ಲೋಕಸಭೆ ಚುನಾವಣೆ ಬೇರೆ, ಸ್ಥಳೀಯ ಚುನಾವಣೆಗಳು ಬೇರೆ. ಇಲ್ಲಿ ಅಭ್ಯರ್ಥಿಗಳಿಗೆ ಆದ್ಯತೆ ನೀಡುತ್ತಾರೆ. ಹಾಗಾಗಿ ನಮ್ಮ ಸಂಘಟನೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುತ್ತಾರೆ ಎಂದಿದ್ದಾರೆ.