
CM
Ashwaveega News 24×7 ಜು.19: ಜೆಡಿಎಸ್ – ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರವನ್ನು ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದರು. ಸರ್ಕರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2,578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಸರಣಿ ಸುಳ್ಳುಗಳ ಮೂಲಕ ರಾಜ್ಯದ ಜನರ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ. ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ. ನಾನೂ ಬರುತ್ತೇನೆ ಎಂದು ಸವಾಲೆಸೆದರು.
ಅಭಿವೃದ್ಧಿಗೆ ಸರ್ಕಾರದ ಬಳಿ ಹಣ ಇಲ್ಲ ಎಂದು ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಇವತ್ತಿನ ಅಭಿವೃದ್ಧಿ ಕಾರ್ಯಗಳೇ ಉತ್ತರ. ಬಿಜೆಪಿ – ಜೆಡಿಎಸ್ ನವರಿಗೆ ಈ ಮಟ್ಟಿನ ಮತ್ಸರ ಇರಬಾರದು. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಅತೀ ಮತ್ಸರ ಪಡುತ್ತಿದ್ದಾರೆ ಎಂದು ಟೀಕಿಸಿದರು.
ಇನ್ನು ರಾಜ್ಯದಲ್ಲಿ ಬಿಜೆಪಿ ಸ್ವಂತ ಶಕ್ತಿಯಿಂದ ಒಮ್ಮೆಯೂ ಅಧಿಕಾರಕ್ಕೆ ಬಂದಿಲ್ಲ. ಪ್ರತೀ ಬಾರಿ ಹಿಂಬಾಗಿಲಿನಿಂದ ಅಧಿಕಾರ ಹಿಡಿಯುತ್ತಿದ್ದಾರೆ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಜೆಡಿಎಸ್ನ ಕುಮಾರಸ್ವಾಮಿ ಸ್ವಂತ ಶಕ್ತಿ ಮೇಲೆ ಯಾವತ್ತೂ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ. ರಾಜ್ಯದ ಜನರ ಪ್ರೀತಿ, ವಿಶ್ವಾಸ, ಅಭಿಮಾನ ಉಳಿಸಿಕೊಳ್ಳದ ಇವರಿಗೆ ನಮ್ಮ ಸರ್ಕಾರದ ಬಗ್ಗೆ ಟೀಕಿಸುವ ನೈತಿಕತೆ ಇಲ್ಲ ಎಂದರು.
ಬಿಜೆಪಿ ಮತ್ತು ಜೆಡಿಎಸ್ ರಾಜ್ಯದ ಪರವಾಗಿಲ್ಲ. ರಾಜ್ಯದ ಜನರ ಪರವಾಗಿಲ್ಲ. ಪ್ರತಿ ವರ್ಷ ನಾವು ರಾಜ್ಯದಿಂದ ಕೇಂದ್ರಕ್ಕೆ ಕೊಡುವ ತೆರಿಗೆಯಲ್ಲಿ ರಾಜ್ಯಕ್ಕೆ ಬರುತ್ತಿರುವುದು ಅತ್ಯಲ್ಪ. ರಾಜ್ಯಕ್ಕೆ ಆದ ಅನ್ಯಾಯ ಸರಿಪಡಿಸಿ ಎಂದು ಮೋದಿಯವರಿಗೆ ಕೇಳುವ ಧೈರ್ಯ ಕೇಂದ್ರ ಸಚಿವ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ ಸೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಸೇರಿ ಯಾರಿಗೂ ಇಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಸೊಲ್ಲೆತ್ತದ ಬಿಜೆಪಿ-ಜೆಡಿಎಸ್ ರಾಜ್ಯದ ಜನಕ್ಕೆ ದ್ರೋಹ ಎಸಗಿದ್ದಾರೆ ಎಂದು ಕಿಡಿಕಾರಿದರು.
ನಾವು ಐದು ಗ್ಯಾರಂಟಿಗಳಲ್ಲದೆ ಅಭಿವೃದ್ಧಿ ಕಾರ್ಯಗಳಿಗೆ ಲಕ್ಷ ಕೋಟಿಯಷ್ಟು ಹಣ ಕೊಟ್ಟಿದ್ದೇವೆ. ನಾವು ಜಾರಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ಕೇವಲ ಕಾಂಗ್ರೆಸ್ ನವರಿಗೆ ಕೊಟ್ಟಿದ್ದಲ್ಲ. ಬಿಜೆಪಿ-ಜೆಡಿಎಸ್ ಬೆಂಬಲಿಗರು, ಮತದಾರರಿಗೂ ಪ್ರತೀ ದಿನ, ಪ್ರತೀ ತಿಂಗಳೂ ಸರ್ಕಾರದ ನೆರವು ದೊರೆಯುತ್ತಿದೆ. ಮೊನ್ನೆಯಷ್ಟೆ ಶಕ್ತಿ ಯೋಜನೆಯಡಿ ಪ್ರಯಾಣಿಸಿದ 500ನೇ ಕೋಟಿಯ ಮಹಿಳೆಗೆ ನಾನೇ ಉಚಿತ ಟಿಕೆಟ್ ಕೊಟ್ಟಿದ್ದೇನೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.