
ನವದೆಹಲಿ: ರಾಜ್ಯದಲ್ಲಿ ಬೆಳೆಯುವ ಹೆಸರು ಕಾಳುಗಳಿಗೆ ಕೇಂದ್ರ ಸರ್ಕಾರ ಬೆಂಬಲ ನೀಡಿದ್ದು, ಬೆಲೆಯೊಂದಿಗೆ ಹೆಚ್ಚುವರಿ ಹೆಸರು ಕಾಳು ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ರೈತರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಹೆಚ್ಚುವರಿ ಹೆಸರು ಕಾಳು ಖರೀದಿಗೆ ಅನುಮತಿ ನೀಡಿದ್ದು, ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ಈಗಾಗಲೇ 22,215 ಮೆಟ್ರಿಕ್ ಟನ್ ಹೆಸರುಕಾಳು ಖರೀದಿಸಿದೆ. ರಾಜ್ಯದಲ್ಲಿ ಹೆಸರು ಕಾಳು ಹೆಚ್ಚುವರಿಯಾಗಿ ಬೆಳೆದಿರುವ ಹಿನ್ನೆಲೆ ಸರ್ಕಾರದಿಂದ ಖರೀದಿಗೆ ರೈತರು ಮನವಿ ಮಾಡಿದ್ದರು. ಈ ಹಿನ್ನೆಲೆ 16,105 ಮೆಟ್ರಿಕ್ ಟನ್ ಹೆಚ್ಚುವರಿಯಾಗಿ ಖರೀದಿಸಲು ಕೃಷಿ ಸಚಿವರ ಜೊತೆಗೆ ಮಾತುಕತೆ ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.