
Ashwaveega News 24×7 ಅಕ್ಟೋಬರ್. 03: ಖ್ಯಾತ ಪತ್ರಕರ್ತ, ಲೇಖಕ ಮತ್ತು ಅಂಕಣಕಾರ ಟಿ.ಜೆ.ಎಸ್. ಜಾರ್ಜ್(97) ಬೆಂಗಳೂರಿನಲ್ಲಿ ನಿಧನರಾದರು.
ತಯ್ಯಿಲ್ ಜೇಕಬ್ ಸೋನಿ ಜಾರ್ಜ್ (TJS George) ಅವರು ಮೇ 7, 1928 ರಂದು ಕೇರಳದಲ್ಲಿ ಜನಿಸಿದ್ದರು. ಮದ್ರಾಸ್ ಕ್ರಿಶ್ಚಿಯನ್ ಕಾಲೇಜಿನಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಪದವಿ ಪಡೆದ ಇವರು ನಂತರ ಮುಂಬೈನ ಫ್ರೀ ಪ್ರೆಸ್ ಜರ್ನಲ್ನಲ್ಲಿ ವೃತ್ತಿಜೀವನವನ್ನು ಆರಂಭಿಸಿದರು.
ದಶಕಗಳ ಕಾಲ ಅವರು ಇಂಟರ್ನ್ಯಾಷನಲ್ ಪ್ರೆಸ್ ಇನ್ಸ್ಟಿಟ್ಯೂಟ್, ದಿ ಸರ್ಚ್ಲೈಟ್, ಫಾರ್ ಈಸ್ಟರ್ನ್ ಎಕನಾಮಿಕ್ ರಿವ್ಯೂಗಳಿಗೆ ಬರೆದಿದ್ದರು. ಹಾಂಗ್ ಕಾಂಗ್ನಲ್ಲಿ ಏಷ್ಯಾವೀಕ್ನ ಸ್ಥಾಪಕ ಸಂಪಾದಕರಾದರು.
ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ಸಂಪಾದಕೀಯ ಸಲಹೆಗಾರರಾಗಿ ಜಾರ್ಜ್ ಸಾಮಾಜಿಕ ಅನ್ಯಾಯ, ಭ್ರಷ್ಟಾಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಧ್ವನಿ ಎತ್ತಿದ್ದರು.
ನೂರಾರು ಪತ್ರಕರ್ತರಿಗೆ ಮಾರ್ಗದರ್ಶನ ನೀಡಿದ್ದರು. ಸಾಹಿತ್ಯ ಮತ್ತು ಶಿಕ್ಷಣಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ 2011 ರಲ್ಲಿ ಕೇಂದ್ರ ಸರ್ಕಾರ ಇವರಿಗೆ
ಪದ್ಮಭೂಷಣ ಪ್ರಶಸ್ತಿ
ನೀಡಿ ಪುರಸ್ಕರಿಸಿತ್ತು.
ಜಾರ್ಜ್ ಅವರು ತಮ್ಮ ಹರಿತವಾದ ಲೇಖನಿ ಮತ್ತು ರಾಜಿಯಾಗದ ಧ್ವನಿಯಿಂದ ಅವರು ಆರು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಪತ್ರಿಕೋದ್ಯಮವನ್ನು ಶ್ರೀಮಂತಗೊಳಿಸಿದ್ದರು. ಓದುಗರನ್ನು ಯೋಚಿಸುವಂತೆ, ಪ್ರಶ್ನಿಸುವಂತೆ ಮತ್ತು ತೊಡಗಿಸಿಕೊಳ್ಳುವಂತೆ ಮಾಡಿದ ನಿಜವಾದ ಸಾರ್ವಜನಿಕ ಬುದ್ಧಿಜೀವಿಯಾಗಿದ್ದರು. ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ನಲ್ಲಿ ಕಂಬನಿ ಮಿಡಿದಿದ್ದಾರೆ